Sunday, August 16, 2026
Homeನಿಮ್ಮ ಜಿಲ್ಲೆಮಂಡ್ಯದಲ್ಲಿ ರೈತ ದಂಪತಿ ಆತ್ಮಹತ್ಯೆ ದುರಂತ: ರೈತರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಬೇಕು –...

ಮಂಡ್ಯದಲ್ಲಿ ರೈತ ದಂಪತಿ ಆತ್ಮಹತ್ಯೆ ದುರಂತ: ರೈತರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಬೇಕು – ಬಿ.ವೈ. ವಿಜಯೇಂದ್ರ

ಮಂಡ್ಯ, : ಮಂಡ್ಯ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿ ಸಾಲದ ಬಾಧೆ ತಾಳಲಾರದೆ ರೈತ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅತ್ಯಂತ ದುಃಖಕರ ಮತ್ತು ನೋವಿನ ಸಂಗತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

ಸಾಲದ ಬಾಧೆಗೆ ಬಲಿಯಾದ ರೈತ ದಂಪತಿ

ಮಂಡ್ಯ ತಾಲೂಕಿನ ಬೀಚನಹಳ್ಳಿ ಗ್ರಾಮದ ಪುಟ್ಟಸ್ವಾಮಿ ಮತ್ತು ನಾಗಮ್ಮ ದಂಪತಿ ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ರಾಜ್ಯದ ರೈತರ ಸಂಕಷ್ಟದ ಪ್ರತಿಬಿಂಬವಾಗಿದೆ ಎಂದು ಅವರು ಹೇಳಿದರು. ಸುಮಾರು ಐದು ಎಕರೆ ಜಮೀನಿನಲ್ಲಿ ಟೊಮ್ಯಾಟೊ ಹಾಗೂ ಇತರೆ ತರಕಾರಿ ಬೆಳೆ ಬೆಳೆದಿದ್ದರೂ, ನಿರಂತರ ನಷ್ಟ ಮತ್ತು ಸಾಲದ ಒತ್ತಡದಿಂದ ಹೊರಬರಲು ಸಾಧ್ಯವಾಗದೆ ಸುಮಾರು ₹10 ರಿಂದ ₹15 ಲಕ್ಷ ಸಾಲ ಮಾಡಿಕೊಂಡಿದ್ದರು. ಬಡ್ಡಿಯನ್ನೂ ಕಟ್ಟಲು ಸಾಧ್ಯವಾಗದ ಪರಿಸ್ಥಿತಿ ಎದುರಾದ ಪರಿಣಾಮ ಆತ್ಮಹತ್ಯೆಗೆ ಶರಣಾಗಿರುವುದು ಅತ್ಯಂತ ದುರದೃಷ್ಟಕರ ಎಂದು ವಿಷಾದ ವ್ಯಕ್ತಪಡಿಸಿದರು.

ರೈತರು ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು

ಯಾವುದೇ ಸಂಕಷ್ಟ ಬಂದರೂ ರೈತರು ಆತ್ಮಸ್ಥೈರ್ಯ ಕಳೆದುಕೊಳ್ಳದೆ ಆತ್ಮಹತ್ಯೆಯಂತಹ ನಿರ್ಧಾರಕ್ಕೆ ಹೋಗಬಾರದು ಎಂದು ವಿಜಯೇಂದ್ರ ಮನವಿ ಮಾಡಿದರು. ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ವಿಶ್ವಾಸವನ್ನು ಕಳೆದುಕೊಳ್ಳಬಾರದು ಎಂದು ರೈತರಿಗೆ ಕರೆ ನೀಡಿದರು.

ರೈತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಸರ್ಕಾರ ಮಾಡಬೇಕು

ರಾಜ್ಯದ ಮುಖ್ಯಮಂತ್ರಿಗಳು ರೈತರಿಗೆ ಬಿತ್ತನೆ ಮಾಡಬೇಡಿ, ಬೆಳೆ ಬೆಳೆಯಬೇಡಿ ಎಂದು ಸಲಹೆ ನೀಡುವುದಕ್ಕಿಂತ, ಸಂಕಷ್ಟದಲ್ಲಿರುವ ರೈತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಅವರು ಒತ್ತಾಯಿಸಿದರು. ಕಾವೇರಿ ಕೊಳ್ಳ ಸೇರಿದಂತೆ ರಾಜ್ಯದ ಎಲ್ಲ ಭಾಗಗಳ ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕಾಗಿದೆ ಎಂದು ಹೇಳಿದರು.

ಬಿಜೆಪಿ ತಂಡಗಳು ರೈತರ ಪರಿಸ್ಥಿತಿ ಅಧ್ಯಯನ ನಡೆಸುತ್ತಿವೆ

ಭಾರತೀಯ ಜನತಾ ಪಕ್ಷದ ತಂಡಗಳು ರಾಜ್ಯದ ಮೂಲೆ ಮೂಲೆಗಳಲ್ಲಿ ಸಂಚರಿಸಿ ರೈತರ ಪರಿಸ್ಥಿತಿಯನ್ನು ಅಧ್ಯಯನ ಮಾಡುತ್ತಿವೆ. ಮಳೆಯ ಕೊರತೆಯಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ ಎಂದು ವಿಜಯೇಂದ್ರ ಹೇಳಿದರು.

ಬರಪೀಡಿತ ಪ್ರದೇಶ ಘೋಷಣೆ ಹಾಗೂ ಸಾಲಮನ್ನಾಗೆ ಆಗ್ರಹ

ಮಳೆಯ ಅಭಾವದಿಂದ ಸಂಕಷ್ಟದಲ್ಲಿರುವ ತಾಲೂಕುಗಳನ್ನು ತಕ್ಷಣ ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕು ಎಂದು ಅವರು ಆಗ್ರಹಿಸಿದರು. ಸಂಕಷ್ಟದಲ್ಲಿರುವ ರೈತರ ಸಾಲ ಮನ್ನಾ ಮಾಡುವುದರ ಜೊತೆಗೆ ಸೂಕ್ತ ಪರಿಹಾರ ಪ್ಯಾಕೇಜ್ ಘೋಷಿಸಿ ನೆರವು ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ರೈತರಿಗೆ ಅನ್ಯಾಯ

ರೈತರ ಸಂಕಷ್ಟಕ್ಕೆ ಸರ್ಕಾರ ತಕ್ಷಣ ಸ್ಪಂದಿಸದಿದ್ದರೆ, ರೈತರ ಪಾಲಿಗೆ ಈ ಸರ್ಕಾರ ಬದುಕಿದ್ದರೂ ಸತ್ತಂತೆಯೇ ಆಗಲಿದೆ ಎಂದು ವಿಜಯೇಂದ್ರ ಟೀಕಿಸಿದರು. ಮುಖ್ಯಮಂತ್ರಿ ಕೂಡಲೇ ರಾಜ್ಯ ಪ್ರವಾಸ ಕೈಗೊಂಡು ರೈತರ ಸಮಸ್ಯೆಗಳನ್ನು ನೇರವಾಗಿ ಆಲಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕಾವೇರಿ ವಿಚಾರದಲ್ಲಿ ರಾಜಕೀಯ ನಾಟಕ ಬೇಡ

ಕಾವೇರಿ ವಿಚಾರದಲ್ಲಿ ಸರ್ವಪಕ್ಷ ಸಭೆ ಕರೆದು ಕಪಟ ನಾಟಕ ಮಾಡುವ ಬದಲು, ರಾಜ್ಯ ಸರ್ಕಾರ ತನ್ನ ಜವಾಬ್ದಾರಿಯನ್ನು ನಿಭಾಯಿಸಬೇಕು ಎಂದು ವಿಜಯೇಂದ್ರ ಹೇಳಿದರು. ಜೂನ್ ತಿಂಗಳಲ್ಲೇ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿ, ಈಗ ರಾಜ್ಯದ ರೈತರಿಗೆ ಬಿತ್ತನೆ ಮಾಡಬೇಡಿ ಎಂದು ಹೇಳುವುದು ಸರಿಯಲ್ಲ. ಇಂತಹ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಯಾವ ರೀತಿಯ ಪೂರ್ವಸಿದ್ಧತೆ ಮಾಡಿಕೊಂಡಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಪ್ರಶ್ನಿಸಿದರು.

ಎಸಿ ಕೊಠಡಿಯ ಸಭೆಗಳಿಗಿಂತ ರೈತರ ಮಧ್ಯೆ ಹೋಗಲಿ

ಬೆಂಗಳೂರಿನಲ್ಲಿ ಎಸಿ ಕೊಠಡಿಯಲ್ಲಿ ಕುಳಿತು ಅಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸುವುದರಿಂದ ರೈತರ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ ಎಂದು ವಿಜಯೇಂದ್ರ ಹೇಳಿದರು. ರೈತ ದಂಪತಿ ಆತ್ಮಹತ್ಯೆಗೆ ಯಾರು ಹೊಣೆ ಎಂಬುದಕ್ಕೆ ಸರ್ಕಾರ ಉತ್ತರಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಪ್ರವಾಸ ಮಾಡಿ ರೈತರ ಸಂಕಷ್ಟ ಆಲಿಸಿ

ಮುಖ್ಯಮಂತ್ರಿಗಳು ದೆಹಲಿಯಲ್ಲಿ ಕಾಲ ಕಳೆಯುವುದಕ್ಕಿಂತ ರಾಜ್ಯದಾದ್ಯಂತ ಪ್ರವಾಸ ಕೈಗೊಂಡು ರೈತರ ಸಂಕಷ್ಟವನ್ನು ನೇರವಾಗಿ ಆಲಿಸಿ, ತಕ್ಷಣ ಪರಿಹಾರ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಬಿ.ವೈ. ವಿಜಯೇಂದ್ರ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ನಾರಾಯಣಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ, ಮಂಡ್ಯ ಜಿಲ್ಲಾಧ್ಯಕ್ಷರಾದ ಡಾ.ಇಂದ್ರೇಶ್ ಮೈಸೂರು ವಿಭಾಗ ಸಹ ಪ್ರಭಾರಿ, ನಿಂಗರಾಜುಗೌಡ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ಅಶೋಕ್ ಜಯರಾಮ್ ಮದ್ದೂರು ವಿಧಾನಸಭಾ ಕ್ಷೇತ್ರದ ಮುಖಂಡರಾದ ಎಸ್ ಪಿ ಸ್ವಾಮಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -spot_img

Most Popular

Recent Comments